ಯುಎಇಅನಿವಾಸಿ ಉದ್ಯಮಿ ನಿಸಾರ್‌ ಅಹ್ಮದ್‌ ಅವರಿಗೆ ಸೇವಾರತ್ನ ಪ್ರಶಸ್ತಿ

ಅನಿವಾಸಿ ಉದ್ಯಮಿ ನಿಸಾರ್‌ ಅಹ್ಮದ್‌ ಅವರಿಗೆ ಸೇವಾರತ್ನ ಪ್ರಶಸ್ತಿ

ಉಡುಪಿ: ಅನಿವಾಸಿ ಉದ್ಯಮಿ, ಸಮಾಜ ಸೇವಕ, ದುಬೈಯ ನ್ಯಾಶ್‌ ಇಂಜಿನಿಯರಿಂಗ್‌ ಸಂಸ್ಥೆಯ ಮಾಲಕ ಕೆ.ಎಸ್.‌ ನಿಸಾರ್‌ ಅಹ್ಮದ್‌ ಅವರಿಗೆ ʼಸೇವಾರತ್ನʼ ಪ್ರಶಸ್ತಿ ನೀಡಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಗೌರವಿಸಿದೆ.

ಇತ್ತೀಚೆಗೆ ಉಡುಪಿಯ ಬಾಸೆಲ್‌ ಮಿಷನ್‌ ಮೆಮೋರಿಯಲ್‌ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭ ಸಂಸದ ಸಸಿಕಾಂತ್‌ ಸೆಂಥಿಲ್‌ ಅವರಿಗೆ ʼಮಾನವ ರತ್ನʼ, ಉಡುಪಿಯ ಧರ್ಮಗುರು ಫಾ. ವಿಲಿಯಮ್‌ ಮಾರ್ಟಿಸ್‌ ಅವರಿಗೆ ʼಸೌಹಾರ್ದ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಿಸಾರ್‌ ಅಹ್ಮದ್‌ ಕಿರುಪರಿಚಯ:

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜನಿಸಿದ ನಿಸಾರ್‌ ಅಹ್ಮದ್‌ ಅವರ ತಂದೆ ಕೆ. ಶಾಬು ಸಾಹೇಬ್‌ ಬ್ರಿಟಿಷರ ಕಾಲದಲ್ಲಿ ಕಂದಾಯ ಅಧಿಕಾರಿಯಾಗಿದ್ದವರು. ಇವರ 9 ಮಕ್ಕಳ ಪೈಕಿ ನಾಲ್ಕನೆಯವರು ನಿಸಾರ್ ಅಹ್ಮದ್.‌ ಕಾರ್ಕಳದ ಸರ್ಕಾರಿ ಶಾಲೆಯಲ್ಲೇ ಶಿಕ್ಷಣ ಪಡೆದ ನಿಸಾರ್‌ ಅಹ್ಮದ್‌ ಅವರದ್ದು ಅನುಕೂಲಸ್ಥ ಕುಟುಂಬವಾಗಿದ್ದರೂ ಶ್ರಮಪಟ್ಟು ದುಡಿದವರು, ಊರಲ್ಲಿ ಬೇರೆ ಬೇರೆ ಕೆಲಸ ಮಾಡಿದರು. 1975ರಲ್ಲಿ ಅಬುಧಾಬಿಗೆ ಹೋದ ನಂತರ ಅವರ ಬದುಕು ಬದಲಾಯಿತು. ಆರಂಭದಲ್ಲಿ ಹಾರ್ಡ್‌ವೇರ್ ಕಂಪೆನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು.

ನಂತರ ನಾಲ್ಕು ಮಂದಿ ನೌಕರರ ಜೊತೆ ಆರಂಭಿಸಿದ ಸಣ್ಣ ಉದ್ಯಮ, ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ ಬಹಳ ದೊಡ್ಡದಾಗಿ ಬೆಳೆಯಿತು. ಸದ್ಯ ದುಬೈಯ ‘ನ್ಯಾಶ್ ಇಂಜಿನಿಯರಿಂಗ್ʼ, ಅಬುಧಾಬಿಯ ’ಸೂಪರ್ ಇಂಜಿನಿಯರಿಂಗ್ ಇಂಡಸ್ಟ್ರಿ’ ಮತ್ತು ’ಸೂಪರ್ ಇಂಜಿನಿಯರಿಂಗ್ ಸರ್ವಿಸ್’ ಎಂಬ  ಬೃಹತ್  ಕಂಪೆನಿಗಳು ನಿಸಾರ್‌ ಅಹ್ಮದ್‌ ಅವರದ್ದು.

ಸ್ಟೀಲ್‌ ಉತ್ಪನ್ನಗಳ ಇವರ ಕಂಪೆನಿಗಳು, ಆಯಿಲ್‌ ಮತ್ತು ಗ್ಯಾಸ್‌ ಇಂಡಸ್ಟಿ, ಕನ್‌ ಸ್ಟ್ರಕ್ಷನ್‌ ಕಂಪೆನಿ, ಪವರ್‌ ಪ್ಲಾಂಟ್‌, ಸ್ಟೀಲ್‌ ಮಿಲ್‌ ಗಳಿಗೆ ಉತ್ಪನ್ನಗಳನ್ನು ಸರಬರಾಜು ಮಾಡ್ತಾ ಇವೆ.

ಸೌದಿ ಅರೇಬಿಯಾ, ಯುಎಇ, ಬ್ರೆಝಿಲ್‌, ಅಲ್ಜೀರಿಯಾ, ರಶ್ಯಾ, ಇರಾಕ್‌, ಭಾರತ, ಕಝಕಿಸ್ತಾನ, ಕುವೈತ್‌, ಅಮೇರಿಕ ಸೇರಿ ಹಲವು ರಾಷ್ಟ್ರಗಳಲ್ಲಿ ಈ ಕಂಪೆನಿಗಳ ಪ್ರಾಜೆಕ್ಟ್‌ ಗಳಿವೆ. ಈ ಕಂಪೆನಿಗಳಲ್ಲಿ 1000ಕ್ಕೂ ಹೆಚ್ಚು ಕಾರ್ಮಿಕರಿದ್ದು, ಡಝನ್ ಗಟ್ಟಲೆ ಇಂಜಿನಿಯರ್‌ ಗಳಿದ್ದಾರೆ. 

ಯಶಸ್ವಿ ಉದ್ಯಮಿ ಎಂಬ ಗುರುತಿನ ಜೊತೆಗೆ ಅವರ ಮತ್ತೊಂದು ಸಾಧನೆ ಸಮಾಜಸೇವೆ. ತನ್ನೂರ ಬಡ ಮಕ್ಕಳು ಶಿಕ್ಷಣ ಪಡೆಯಲು 41 ವರ್ಷಗಳ ಹಿಂದೆ ನಿಸಾರ್‌ ಅಹ್ಮದ್ ಕಂಡ ಕನಸಿನ ಪ್ರತಿಫಲವಾಗಿ ಕಾರ್ಕಳದಲ್ಲಿ ಕೆಎಂಇಎಸ್‌ ಶಿಕ್ಷಣ ಸಂಸ್ಥೆ ತಲೆ ಎತ್ತಿ ನಿಂತಿದೆ. ಎಲ್‌ ಕೆಜಿಯಿಂದ ದ್ವಿತೀಯ ಪಿಯುಸಿವರೆಗಿರುವ ಈ ಶಾಲೆ ಹಾಗು ಕಾಲೇಜಿನಲ್ಲಿ  1000ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಬಡ ಮಕ್ಕಳನ್ನು ಗುರುತಿಸಿ ಅವರಿಗೆ ಇಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತಿದೆ.

ಈ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ಹಲವು ಮಕ್ಕಳು ಇಂಜಿನಿಯರ್‌ ಗಳು, ವೈದ್ಯರಾಗಿದ್ದಾರೆ. ಈ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ತನ್ನದೇ ಸಂಸ್ಥೆಯಲ್ಲಿ ಉದ್ಯೋಗವನ್ನೂ ನೀಡಿದ್ದಾರೆ. ಇದರ ಜೊತೆಗೆ ಪ್ರತಿ ವರ್ಷ ಈ ಶಿಕ್ಷಣ ಸಂಸ್ಥೆಗೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡುತ್ತಿದ್ದಾರೆ. ನಿಸಾರ್ ಅಹ್ಮದ್ ಅವರ ಕಿರಿಯ ಸಹೋದರ ಕೆ ಎಸ್ ಇಮ್ತಿಯಾಜ್ ಅಹ್ಮದ್ ಅವರು  ಕೆಎಂಇಎಸ್‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿದ್ದಾರೆ.

ಹಲವು ಕಡೆಗಳಲ್ಲಿ ದೇವಸ್ಥಾನ, ಚರ್ಚ್‌, ಮಸೀದಿಗಳಿಗೆ ನೆರವು ನೀಡಿದ್ದಾರೆ. ಹಲವಾರು ಆಂಬುಲೆನ್ಸ್‌ ಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದು, ಮಹಿಳೆಯರಿಗಾಗಿಯೇ ಮಂಗಳೂರಿನ ಕುದ್ರೋಳಿಯಲ್ಲಿ  ಸುಸಜ್ಜಿತ ವೃದ್ಧಾಶ್ರಮವೊಂದನ್ನು ಕಟ್ಟಿಸಿದ್ದಾರೆ. 

ತಮ್ಮ ತಂದೆಯ ಹೆಸರಿನಲ್ಲಿ ಸ್ಥಾಪಿಸಿರುವ ಹಾಜಿ ಕಾರ್ಕಳ ಶೇಖ್ ಶಾಬು ಸಾಹೇಬ್ ಟ್ರಸ್ಟ್ ಮೂಲಕ ಪ್ರತಿ ವರ್ಷ ಸಾಮೂಹಿಕ ವಿವಾಹ ಸಮಾರಂಭ ಏರ್ಪಡಿಸುತ್ತಾರೆ. ಅದೇ ಟ್ರಸ್ಟ್ ಮೂಲಕ ಬಡ ಕುಟುಂಬಗಳಿಗೆ ರೇಷನ್, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತಿತರ ಸಹಾಯವನ್ನೂ ಮಾಡುತ್ತಿದ್ದಾರೆ.

ನಿಸಾರ್ ಅಹ್ಮದ್ ಅವರ ಹಿರಿಯಣ್ಣ, ಹಿರಿಯ ಸಾಮಾಜಿಕ, ರಾಜಕೀಯ ಮುಂದಾಳು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಜನಾಬ್ ಕೆಎಸ್ ಮೊಹಮ್ಮದ್ ಮಸೂದ್ ಅವರು ಹಾಜಿ ಕಾರ್ಕಳ ಶಾಬು ಸಾಹೇಬ್ ಟ್ರಸ್ಟ್ ನ ಅಧ್ಯಕ್ಷರಾಗಿದ್ದಾರೆ.

Hot this week

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

KCWA holds General Body Meeting in Kuwait, announces major cultural event in December

Kuwait City: Kuwait Canara Welfare Association (KCWA) held its...

ನ್ಯೂಯಾರ್ಕ್; ಆಲ್ಬನಿ ಕನ್ನಡಿಗರಿಂದ ಮಸಾಲ ದೋಸೆ ಬ್ರಂಚ್: ಹಿಂದೂ ದೇವಾಲಯಕ್ಕೆ ಧನ ಸಹಾಯ

ನ್ಯೂಯಾರ್ಕ್ ರಾಜ್ಯದ ರಾಜಧಾನಿ ಅಲ್ಬನಿಯಲ್ಲಿರುವ ಕನ್ನಡಿಗರು, ಇತ್ತೀಚೆಗೆ ಇಲ್ಲಿರುವ ಹಿಂದೂ ದೇವಸ್ಥಾನದಲ್ಲಿ...

ದ್ವೀಪ ರಾಷ್ಟ್ರ ಬಹರೈನ್‌ನಲ್ಲಿ ಸಾರ್ಥಕೆತೆಯನ್ನು ಕಂಡ ಮಂಗಳೂರಿನ ಹೃದಯವಂತ ಅಮರನಾಥ್ ರೈ!

ಬಹರೈನ್‌: ಪ್ರಾಮಾಣಿಕತೆ ಮತ್ತು ದುಡಿಮೆ—ಈ ಎರಡು ಮೌಲ್ಯಗಳು ಒಬ್ಬನ ಬದುಕನ್ನು ಎಷ್ಟು...

Related Articles

Popular Categories